ಸೋಮವಾರ, ಅಕ್ಟೋಬರ್ 7, 2013

ಶಾಂತಗಿರಿಯ ರಿವಾಯ್ತ್ ಹುಡುಗರು



-ಅರುಣ್ ಜೋಳದಕೂಡ್ಲಿಗಿ

 ಕಳೆದ ವರ್ಷ ರಹಮತ್ ಮೇಷ್ಟ್ರು ನಾನು ರೋಣ, ಬಿಜಾಪುರ, ಇಂಡಿ ಭಾಗದ ರಿವಾಯ್ತು ಹಾಡುಗಾರರನ್ನು ಬೇಟಿಮಾಡಲೆಂದು ಪ್ರಯಾಣ ಬೆಳೆಸಿದ್ದೆವು. ಹೀಗೆ ಕ್ಷೇತ್ರ ಕಾರ್ಯಕ್ಕೆ ಹೋಗುವಾಗ ನಾವು ಬೇಟಿ ಮಾಡಬೇಕೆಂದ ಊರಿಗೆ ಮಾತ್ರ ಹೋಗುವುದಿಲ್ಲ. ಬದಲಾಗಿ ದಾರಿ ಮಧ್ಯೆ ನುಸುಳುವ ಹಳ್ಳಿಗಳ ಜನರನ್ನು ಮಾತಿಗೆಳೆದು, ಆಯಾ ಊರಿನ ಬಗ್ಗೆ ವಿಚಾರಿಸುತ್ತಾ ನಿಧಾನಕ್ಕೆ ಅಲ್ಲಿನ ಸ್ಥಳೀಯ ವಿಶಿಷ್ಟತೆಯ ಬಗ್ಗೆ ಮಾತು ಬೆಳೆಯುತ್ತದೆ. ಇಂತಹ ಮಾತುಕತೆಯಲ್ಲಿ ಕೆಲವೊಮ್ಮೆ ಅಪರೂಪದ ಮಾಹಿತಿ ಸಿಗುವುದುಂಟು, ಹಾಡುಗಾರಿಕೆಯ ಪರಿಚಯ ಆಗುವುದುಂಟು.

 ಹೀಗೆ ದಾರಿಯಲ್ಲಿ ಸಿಕ್ಕ ಊರುಗಳಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಶಾಂತಗಿರಿ ನಮ್ಮನ್ನು ಬೆರಗುಗೊಳಿಸಿತು. ಕೊಪ್ಪಳದ ಭಾಗದಿಂದ ಹೋಗುವುದಾದರೆ ಗಂಜೆಂದ್ರಗಡದಿಂದ ೨೦ ಕಿ.ಮೀ, ಹುಬ್ಬಳ್ಳಿ ಗದಗ ಭಾಗದಿಂದ ಬಂದರೆ ರೋಣದ ಜಾಲಿಹಾಳ-ಬೇವೂರು ಕ್ರಾಸಿನಿಂದ ೩೦ ಕಿ.ಮೀ ಇರುವ ಈ ಹಳ್ಳಿ ಸಾಂಸ್ಕೃತಿಕವಾಗಿ ಜೀವಂತಿಕೆಯಿಂದ ಕೂಡಿದೆ.


  ನಾವು ಈ ಊರು ಪ್ರವೇಶ ಮಾಡಿದಾಗ, ಇಡೀ ಊರಿಗೇ ಊರೇ ಅಲಾಯಿ ಹಬ್ಬದಲ್ಲಿ ಮಿಂದೆದ್ದಂತೆ ಸಂಭ್ರಮದಲ್ಲಿತ್ತು. ಹೊನಲು ಬೆಳಕಿನ ಗ್ರಾಮೀಣ ಕಬ್ಬಡಿ ಆಟದ ಅಖಾಡಗಳು ಸಜ್ಜಾಗುತ್ತಿದ್ದವು. ಫ್ಲೆಕ್ಸುಗಳಲ್ಲಿ ಯುವಕರ ಪೋಟೋಗಳು, ಹಬ್ಬದ ಶುಭಾಷಯಗಳು, ಬಣ್ಣದ ಹಾಳೆಯ ಸಾಲುಗಳು ಊರನ್ನು ರಂಗೇರಿಸಿದ್ದವು. ಫಕೀರರಾದ ನೂರಾರು ಬಾಲಕರು ಕೈಗೆ ಕೆಂಪನೆ ಲಾಡಿ ಕಟ್ಟಿಕೊಂಡು ಹಬ್ಬದ ಖುಷೀಲಿ ಊರಲೆಯುತ್ತಿದ್ದರು. ದಾರಿಯಲ್ಲಿ ಸಿಕ್ಕ ಕಾಶಪ್ಪನವರು ‘ನೀವ್ ಸಾಂತಗಿರಿಗೋಗ್ರಿ ರಿವಾಯ್ತಿ ಹುಡುಗ್ರ ಹಿಂಡಾ ಐತಿ, ಈ ಸೀಮೆಗಾ ಬಾರಿ ಪೇಮಸ್ ಸರ್ ಅವ್ರು, ನೀವು ಹೋಗ್ ನೋಡ್ರಿ’ ಎಂದಿದ್ದ ಮಾತು ಹುಸಿ ಹೋಗಲಿಲ್ಲ ಎಂದುಕೊಂಡೆವು.  ನಾವು ಊರೊಳಗಿನ ಜನರ ಜತೆ ಮಾತಾಡಿದಾಗ ರಿವಾಯ್ತು ಮೇಷ್ಟ್ರು ಶರಣಪ್ಪ ಯಮನೂರಪ್ಪ ಹುಲ್ಲನ್ನವರ್ ಬಗ್ಗೆ ಮಾಹಿತಿ ಸಿಕ್ಕಿತು.

 ಶರಣಪ್ಪನವರನ್ನು ಮಾತನಾಡಿಸುತ್ತ ಕೂತಿರುವಾಗಲೇ ಅವರ ಮನೆಯ ಮುಂದೆ ರಿವಾಯ್ತ್ ಹುಡುಗರು ಹಾಜರಾದರು.  ಹೂವಿನ ಚಡಿ ಹಿಡಿದು ಹೆಜ್ಜೆ ಹಾಕಲು ಸಜ್ಜಾದರು. ಅಪಘಾತದಲ್ಲಿ ಕಾಲು ಕಳೆದುಕೊಂಡ ಶರಣಪ್ಪನವರು ಎದ್ದು ಓಡಾಡುವಂತಿರಲಿಲ್ಲ. ಕುಳಿತಲ್ಲಿಯೇ ಕಾಲ ತಳ್ಳುತ್ತಿದ್ದಾರೆ. ಅವರನ್ನು ನಾಲ್ಕೈದು ಹಾಡಿಕೆ ಹುಡುಗರು ಮಗುವಿನಂತೆ ಎತ್ತಿಕೊಂಡು ಮನೆ ಮುಂದಣ ಅಂಗಳದಲ್ಲಿ ಕುರ್ಚಿಯೊಂದರಲ್ಲಿ ಕೂರಿಸಿದರು. ಅವರು ಹಾಡು ಹೇಳಲು ಅಣಿ ಮಾಡಿಕೊಳ್ಳುತ್ತಿದ್ದಂತೆ ಹುಡುಗರು ಹೆಜ್ಜೆ ಹಾಕಲು ತಯಾರಾದರು. ಹೀಗೆ ಶರಣಪ್ಪ ಏರು ಇಳಿವಿನ ರಿವಾಯ್ತನ್ನು ದೊಡ್ಡ ದ್ವನಿಯಲ್ಲಿ ಹಾಡತೊಡಗಿದಂತೆ ಹುಡುಗರ ಹೆಜ್ಜೆ ಸದ್ದುಗಳು ಲಯಕ್ಕೆ ಸರಿಯಾಗಿ ಹೊಂದಿಕೆಯಾಗತೊಡಗಿದವು.

  ಹಿರಿಯರಾದ ಈರಪ್ಪ ಯಲ್ಲಪ್ಪ ಪಿಳಿಗುಂಟರ್ ಅವರು ಹುಡುಗರು ಹೆಜ್ಜೆ ಸರಿಯಾಗಿ ಹಾಕುತ್ತಾರಾ? ಹಾಡಿನ ಲಯ ತಪ್ಪುತ್ತದೆಯೇ ಎಂದು ಗಮನಿಸುತ್ತಾ ಸಲಹೆ ನೀಡುತ್ತಿದ್ದರೆ, ತಂಡದ ಹಾಡುಗಾರ ಮಲ್ಲಪ್ಪ ನಿಂಗಪ್ಪ ಹುಲ್ಲನ್ನವರ್ ಶರಣಪ್ಪ ಅವರಿಗೆ ಧ್ವನಿಗೂಡಿಸುತ್ತಾರೆ. ಫಕ್ಕೀರಪ್ಪ ಪುಸ್ತಕ ಹಿಡಿದು ಪದ ಎತ್ತಿ ಕೊಡುತ್ತಾ, ಸಾಲು ತಪ್ಪದಂತೆ ನೋಡುತ್ತಿದ್ದರೆ, ಯಲ್ಲಪ್ಪ ಹೊಳೆಯಪ್ಪ ಪಿಳಿಬಂಟರ್, ಮುತ್ತಪ್ಪ ಹನುಮಪ್ಪ ಹುಲ್ಲಣ್ಣನವರ್ ರಿವಾಯ್ತಿನ ಲಯಕ್ಕೆ ತಕ್ಕ ಹಾಗೆ ಹಲಗೆ ಬಾರಿಸುತ್ತಾರೆ. ಈ ಹಲಗೆ ನಾದಕ್ಕೆ ನೋಡುಗರು ಕೂಡ ಅರಿವಿಲ್ಲದಂತೆ ಕಾಲು ಕುಣಿಸುತ್ತಾರೆ. ಹೀಗೆ ಇವರೆಲ್ಲಾ ರಿವಾಯ್ತು ಹುಡುಗರ ಲಯವನ್ನು ಹಿಡಿದು ಸರಿದೂಗಿಸುತ್ತಾರೆ. ಈ ಲಯಕ್ಕೆ ತಪ್ಪಿದರೆ ಕಣ್ಣಲ್ಲೆ ಸನ್ನೆ ಮಾಡುತ್ತಲೋ, ಸಿಡುಕಿನಿಂದ ಗದರುತ್ತಲೋ ಹುಡುಗರು ತಪ್ಪೆಜ್ಜೆ ಇಡದಂತೆ ಕಾವಲು ಕಾಯುತ್ತಾರೆ.

  ಮೊಹರಂ ಹೊತ್ತಿನಲ್ಲಿ ಇಡೀ ಊರಿಗೆ ಊರೇ ರಿವಾಯ್ತಿನ ಗುನುಗಿನಿಂದ ತುಂಬಿರುತ್ತದೆ. ಕುಷ್ಟಿಗಿ ತಾಲೂಕಿನ ಗೊನ್ನಾಗರದ ಮಾಸನಕಟ್ಟಿ ಶರಣಪ್ಪ ಎನ್ನುವ ಪ್ರಸಿದ್ಧ ಮೊಹರಂ ಕವಿಯ ಪದಗಳನ್ನು ಶಾಂತಗಿರಿಯವರು ಹಾಡುತ್ತಾರೆ. ಅಂತೆಯೇ ಪ್ರತಿ ವರ್ಷವೂ ಹಾಡು ಬದಲಿಸುತ್ತಾರೆ. ‘ವರ್ಸನೂ ಹೊಸ ಹಾಡ ಹಾಡ್ತೀವ್ರೀ..ಹೀಗೆ ಹಾಡು ಬದಲಿಸದೆ ಹಳಸಲು ಹಾಡು ಹಾಡಿದ್ರೆ, ಜನ ಕೇಳಲ್ರಿ, ನಾವು ಬೇರೇ ಊರಾಗಿನ ಹಾಡ್ಕೀ ಮಂದೀ ಹತ್ರ ಹೋಗಿ ಹೊಸ ಹಾಡ ತರ‍್ತೇವಿ, ನಮ್ ಹಾಡ ಅವರಿಗೆ ಕೊಡ್ತೇವಿ ಹಿಂಗ ಹಾಡ ಕೊಡುಕೊಳ್ಳಿ ಇದೇರಿ’ ಎಂದು ಶರಣಪ್ಪ ಹೇಳುತ್ತಾರೆ.

 ಹಾಡಿಕೆ ಹುಡುಗನೊಬ್ಬ ‘ನೀವು ಕವಿ ಅಂದ್ರೆಲ್ಲ ನಿಮ್ಮವು ಎರಡು ಹಾಡ ಇದ್ರ ಕೊಡ್ರಿ, ಹಾಡ್ತೇವಿ’ ಎಂದು ನನ್ನನ್ನು ಕೇಳಿದಾಗ ಕಕ್ಕಾಬಿಕ್ಕಿಯಾದೆ. ನಾನು ಬರೆದ ಕವಿತೆಗಳು ನಿಮಗ ಹಾಡಾಕ ಬರಲ್ರಿ ಎನ್ನೋಣ ಅಂದುಕೊಂಡೆ, ಆದರೆ ‘ಹಂಗಾರ ನೀವೆಂಗ ಕವಿ ಅಕ್ಕೀರಿ’ ಎಂದುಬಿಟ್ಟಾರು ಎಂಬ ಭಯದಲ್ಲಿ ಮಾತು ಬದಲಿಸಿದೆ. ಈ ಮಾತು ಶಿಷ್ಟ ಕಾವ್ಯವು ಜನರೊಳಗೆ ನುಗ್ಗುವ ಶಕ್ತಿ ಇರದ ಸತ್ಯವನ್ನು ಇರಿದು ತೋರಿದಂತಾಯಿತು.

  ಶಾಂತಗಿರಿಯಲ್ಲಿ ನಾಲ್ಕೈದು ರಿವಾಯ್ತ್ ತಂಡಗಳಿವೆ. ಇಲ್ಲಿ ಹಾಡ ಹೇಳುವವರು ಮಾತ್ರ ಹಿರಿಯರಿದ್ದು ಹಾಡ ಹೇಳುತ್ತಾ ಹೆಜ್ಜೆ ಹಾಕುವುದು ಸಾಮಾನ್ಯವಾಗಿ ೧೫ ರಿಂದ ೨೫ರ ವಯಸ್ಕ ಹುಡುಗರು.  ವಾಲ್ಮೀಕಿ ತಂಡ, ಉಪ್ಪಾರ ತಂಡ, ಕುರುಬ ಸಮಾಜದ ಎರಡು ತಂಡಗಳಿವೆ. ಸರಿಸುಮಾರು ನೂರಕ್ಕೂ ಹೆಚ್ಚಿನ ಹುಡುಗರು ಈ ಊರಿನಲ್ಲಿ ರಿವಾಯ್ತು ಮಜಲಿನಲ್ಲಿ ಹೆಜ್ಜೆ ಹಾಕಿ ಪದ ಹೇಳುತ್ತಾರೆ. ಈ ಹುಡುಗರು ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿಯೇ ಓದಿಗೆ ವಿಧಾಯ ಹೇಳಿದವರು. ಪೂರ್ಣ ಓದು ಬರಹ ಬರದ ಅನಕ್ಷರಸ್ತ ಹುಡುಗರೂ ತಂಡದಲ್ಲಿದ್ದಾರೆ.

  ಹತ್ತಿರದ ಊರುಗಳ ಜಾತ್ರೆ, ಪರಿಷೆ, ಉರುಸುಗಳಿಗೆ  ಹಾಡಲು ಈ ಹುಡುಗರಿಗೆ ವೀಳ್ಯಾ ಕೊಡುತ್ತಾರೆ. ಆಗ ಆಯಾ ಊರುಗಳಿಗೆ ಟಂ ಟಂ, ಟ್ರಾಕ್ಸ್ ಮುಂತಾದ ವಾಹನಗಳಲ್ಲಿ ತಂಡವೇ ಹೋಗುತ್ತದೆ. ಆ ಊರಿಗೆ ಹತ್ತಾರು ರಿವಾಯ್ತು ತಂಡಗಳು ಬಂದಿರುತ್ತವೆ. ಅಲ್ಲಿ ಹಾಡಿಕೆ ಸ್ಪರ್ಧೆ ನಡೆಯುತ್ತದೆ. ಸ್ಪರ್ಧೆಯಲ್ಲಿ ಗೆದ್ದವರಿಗೆ ಕಡೇವು ಕಟ್ಟಿರುತ್ತಾರೆ. ಒಂದೂರಿಗೆ ಹತ್ತು ಹನ್ನೆರಡು ಮೇಳ ಕೂಡಿರುತ್ತದೆ. ಒಂದು ಸಾವಿರದಿಂದ ಐದು ಸಾವಿರದ ವರೆಗೆ ಊರಿನ ದೂರವನ್ನು ಆಧರಿಸಿ ಸಂಭಾವನೆ ಕೊಡುತ್ತಾರೆ. 
 ಹೂವಿನ ಚಡಿ ಹಿಡಿದು ಕಾಲಿಗೆ ಗೆಜ್ಜೆ ಕಟ್ಟಿ ಹುಡುಗರು ಹೆಜ್ಜೆ ಹಾಕುತ್ತಿದ್ದರೆ, ಇದನ್ನು ಹಳ್ಳಿಗರು ಸಂಭ್ರಮದಿಂದ ನೋಡಿ ಕಣ್ತುಂಬಿಕೊಳ್ಳುತ್ತಾರೆ. ಈ ತಂಡ ರೋಣ ತಾಲೂಕಿನ ಸುತ್ತಮುತ್ತಣ ಹಳ್ಳಿಗಳಲ್ಲಿ ಪ್ರದರ್ಶನ ಕೊಟ್ಟದ್ದು ಬಿಟ್ಟರೆ, ಗದಗ ಜಿಲ್ಲೆಯ ಸಂಸ್ಕೃತಿ ಇಲಾಖೆಯ ಕಣ್ಣಿಗೂ ಬಿದ್ದಿಲ್ಲ. ಹಾಗಾಗಿ ಕರ್ನಾಟಕದ ಬೇರೆ ಬೇರೆ ಕಡೆ ತಮ್ಮ ಹೆಜ್ಜೆಯ ಮಜಲನ್ನು ತೋರಿಸಲು ಸಾದ್ಯವಾಗಿಲ್ಲ. ಇಂತಹ ಕಾರಣಕ್ಕಾಗಿ ರಿವಾಯ್ತಿನ ಕಂಚಿನ ಕಂಠದ ಈ ಹಾಡುಗಾರರು ಜಾನಪದ ಅಕಾಡೆಮಿಯ ಯಾವ ಪ್ರಶಸ್ತಿಯ ವ್ಯಾಪ್ತಿಗೂ ಈತನಕ ಬಂದಿಲ್ಲ. ಹಾಡಿ ಧ್ವನಿಬಿದ್ದ ಹಿರಿಯ ಗಾಯಕರು ಜನಪದ ಕಲಾವಿದರ ಮಾಶಾಸನಕ್ಕೆ ಅರ್ಜಿ ಹಾಕಲು ಯಾವುದೇ ಲಿಖಿತ ದಾಖಲೆಗಳನ್ನೂ ಇವರು ಸಂಪಾದಿಸಿಲ್ಲ.

  ಇಂದು ಬಹುಪಾಲು ಜನಪದ ಕಲೆ ಮತ್ತು ಹಾಡುಗಾರಿಕೆಗೆ ಮಹಿಳೆಯರ ಪ್ರವೇಶವಾಗಿದೆ. ಆದರೆ ರಿವಾಯ್ತು ಹಾಡುಗಾರಿಕೆಯಲ್ಲಿ ಇಂತಹ ಪ್ರವೇಶ ಸಾದ್ಯವಾಗಿಲ್ಲ. ಈ ಹಾಡಿನ ಸಾಹಿತ್ಯದಲ್ಲೂ ಪುರುಷ ಪಾರಮ್ಯವೇ ಹೆಚ್ಚಿದೆ. ಪುರುಷರೇ ಹೆಚ್ಚಿರುವ ಡೊಳ್ಳಿನ ಹಾಡು ಪರಂಪರೆಯಲ್ಲಿ ಹದಿ ಹರೆಯದ ಹುಡುಗಿಯರ ಪ್ರವೇಶವಾಗಿದೆ. ಹಾಗೆ ನೋಡಿದರೆ ಹುಡುಗರ ಹಾಡುಗಾರಿಕೆಯ ಏಕಸ್ವಾಮ್ಯವನ್ನು ರಿವಾಯ್ತು ಈತನಕವೂ ಬಿಟ್ಟುಕೊಟ್ಟಂತಿಲ್ಲ.

 ಹೀಗೆ ಉತ್ತರ ಕರ್ನಾಟಕದ ಅನೇಕ ಹಳ್ಳಿಗಳಲ್ಲಿ ಭಜನೆ, ಕೋಲಾಟ, ಡೊಳ್ಳಿನ ಹಾಡು, ಲಾವಣಿ ಮುಂತಾದ ಹಾಡಿಕೆ ಹುಡುಗರ ತಂಡಗಳಿವೆ. ಇದರಲ್ಲಿ ಬಹುಪಾಲು ಯುವಕರು ಅರೆ ವಿದ್ಯಾವಂತರು. ಹೊಲಮನಿ ಕೆಲಸಕ್ಕೆ ಹೊಂದಿಕೊಂಡ ಯುವಕರು, ಹತ್ತಿರದ ನಗರಗಳಿಗೆ ಕೆಲಸ ಅರಸಿ ಹೋಗುವವರಿದ್ದಾರೆ. ಇವರನ್ನು ಹೊರತುಪಡಿಸಿದರೆ, ಬೆಂಗಳೂರು, ಮಂಗಳೂರು, ಪುಣೆ, ಗೋವಾ, ಬಾಂಬೆ ಮುಂತಾದ ಕಡೆಗಳಿಗೆ ಕೆಲಸ ಹುಡುಕಿಕೊಂಡು ಹೋಗುವ ವಲಸಿಗ ಯುವಕರ ಸಂಖ್ಯೆ ದೊಡ್ಡದಿದೆ. ಹೀಗೆ ಹಳ್ಳಿ ಹುಡುಗರು ಹರಿದು ಹಂಚಿದ್ದಾರೆ. ದೂರದೂರುಗಳಿಗೆ ದುಡಿಯಲು ಹೋದ ಯುವಕರು ವರ್ಷಕ್ಕೆ ಎರಡುಮೂರು ಬಾರಿ ತಮ್ಮೂರುಗಳಿಗೆ ಮರಳುತ್ತಾರೆ. ಅಲೆ ಹಬ್ಬಕ್ಕೆ(ಮೊಹರಂ) ಕಡ್ಡಾಯವಾಗಿ ವಲಸಿಗರು ತಮ್ಮೂರು ಸೇರುತ್ತಾರೆ.

   ತಿಂಗಳು ಮುಂಚೆಯೇ ಬಂದವರು ರಿವಾಯ್ತು ತಾಲೀಮು ಮಾಡುತ್ತಾರೆ, ಹೊಸ ಹಾಡು ಕಲಿತು, ಮರೆತ ಹೆಜ್ಜೆಗಳ ಮತ್ತೊಮ್ಮೆ ಹೊಂದಿಸಿಕೊಂಡು ಹಬ್ಬ ಆಚರಿಸಿ ಮತ್ತೆ ದೂರದೂರುಗಳ ದಾರಿ ಹಿಡಿಯುತ್ತಾರೆ. ಇದು ಬಹುತೇಕ ಉತ್ತರ ಕರ್ನಾಟಕದ ಹಳ್ಳಿಗಳ ಚಿತ್ರಣವೂ ಕೂಡ. ಸಾಂಸ್ಕೃತಿಕವಾಗಿ ಶ್ರೀಮಂತವಿರುವ ಇಂತಹ ಹಳ್ಳಿಗಳು ಆರ್ಥಿಕವಾಗಿ ಬಡಕಲಾಗಿವೆ. ಈ ಭಾಗದ ಯುವಕರು ತಾವಿದ್ದಲ್ಲಿಯೇ ಇದ್ದು ಆರ್ಥಿಕವಾಗಿ ಅಸ್ತಿಪಂಜರದಂತ ಹಳ್ಳಿಗಳಿಗೆ ರಕ್ತ ಮಾಂಸ ತುಂಬುವ ಕೆಲಸ ಆಗಬೇಕಿದೆ. ಇಂತವರನ್ನು ಊರಿನಲ್ಲಿ ಹಿಡಿದಿಟ್ಟುಕೊಳ್ಳುವ ಉದ್ಯೋಗಗಳ ಆಕರ್ಷಣೆಯನ್ನು ಹೆಚ್ಚಿಸುವ ಜವಾಬ್ದಾರಿ ಆಳುವ ಸರಕಾರದ ಮೇಲಿದೆ.

    ಈಚೆಗೆ ಜನರ ವೃತ್ತಿಗಳನ್ನು ಆಧರಿಸಿದ ಸಮುದಾಯ ಕಾಲೇಜುಗಳನ್ನು ಸ್ಥಾಪಿಸಲು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ (ಎಂ.ಎಚ್.ಆರ್.ಡಿ) ಮುಂದಾಗಿದೆ. ಕರ್ನಾಟಕದ ಕೆಲವು ಕಾಲೇಜುಗಳಲ್ಲಿ ಹೇರ್‌ಕಟಿಂಗ್ ಕೋರ್ಸು ಶುರುವಾಗಿವೆ. ಈ ಯೋಜನೆ ರಾಜ್ಯದ ಆಯಾ ಪ್ರಾದೇಶಿಕ ನೆಲೆಗಳ ಅಗತ್ಯಗಳನ್ನಾಧರಿಸಿ ರೂಪುಗೊಳ್ಳಬೇಕಿದೆ.

  ನಗರಗಳಿಗೆ ವಲಸೆ ಹೋಗುವ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕದ ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸಮುದಾಯ ಕಾಲೇಜುಗಳನ್ನು ಆರಂಭಿಸಬೇಕಿದೆ. ಇಲ್ಲಿಯ ಕೃಷಿ ಉತ್ಪನ್ನಗಳನ್ನು ಆಧರಿಸಿದ ಉಪ ಉತ್ಪನ್ನಗಳನ್ನು ತಯಾರಿಸುವ, ಅದಕ್ಕೆ ಮಾರುಕಟ್ಟೆ ಒದಗಿಸುವ ರೀತಿಯಲ್ಲಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವಂತೆ ವಾಸ್ತವಿಕ ನೆಲೆಗಟ್ಟಿನಲ್ಲಿ ಸಮುದಾಯ ಕಾಲೇಜುಗಳನ್ನು ಸ್ಥಾಪಿಸಬಹುದಾಗಿದೆ. ಹೀಗೆ ವಲಸೆ ಹುಡುಗರು ಹಳ್ಳಿಗಳಲ್ಲಿ ನಿಂತು ಕೆಲಸ ಮಾಡುವ ಹಾಗೆ ಹತ್ತಾರು ಯೋಜನೆಗಳನ್ನು ರೂಪಿಸುವ ಅಗತ್ಯವಿದೆ. ಹಾಗಾದಲ್ಲಿ ಹಳ್ಳಿಗಳ ಸಾಂಸ್ಕೃತಿಕ ವೈವಿಧ್ಯ ಆರ್ಥಿಕ ಸುಸ್ತಿತಿಯಿಂದ ಹೊಸ ಆಯಾಮ ಪಡೆಯಲು ಸಾದ್ಯವಿದೆ.


ಹೆಜ್ಜೆ ಹಾಕುವ ತಂಡದ ಹುಡುಗರು:
ರಾಮಪ್ಪ ಈರಪ್ಪ ಪಿಳಿಬಂಟರ್, ಪಕ್ಕೀರಪ್ಪ ಪರಸಪ್ಪ ಹಟ್ಟಿಮನಿ, ಮಲ್ಲಪ್ಪ ಹನುಮಪ್ಪ ಹಟ್ಟಿಮನಿ, ಮಂಜಪ್ಪ ಬಾಲಪ್ಪ ಹಟ್ಟಿಮನಿ, ಶಂಕ್ರಪ್ಪ ಹನುಮಪ್ಪ ಹಟ್ಟಿಮನಿ, ಮಂಜಪ್ಪ ಚಂದಪ್ಪ ಹುಲ್ಲನ್ನನವರ್, ಮುತ್ತಣ್ಣ ಶರಣಪ್ಪ ಹುಲ್ಲನ್ನವರ್, ಪರಸಪ್ಪ ರಾಮಪ್ಪ ಪಿಳಿಬಂಟರ್, ಶಂಕ್ರಪ್ಪ ಪರಸಪ್ಪ ಹೊಸಮನಿ, ಪಡೆಯಪ್ಪ ಭೀಮಪ್ಪ ಹೊಸಮನಿ, ಯಮನೂರಪ್ಪ ಬಾಳಪ್ಪ ಹೊಸಮನಿ, ಬಸಪ್ಪ ದೇವೇಂದ್ರಪ್ಪ ಹೊಸಮನಿ, ಶಿವಪ್ಪ ಹನುಮಪ್ಪ ಹೊಸಮನಿ, ಯಮನೂರಪ್ಪ ಯಲ್ಲಪ್ಪ ಹಟ್ಟೀಮನಿ, ಪಡಿಯಪ್ಪ ಶೇಕಪ್ಪ ಹೊನ್ನೂರು, ಶರಣಪ್ಪ ಶಂಕ್ರಪ್ಪ ಹಟ್ಟೀಮನಿ, ಕಾಶಪ್ಪ ಪರಸಪ್ಪ ನೀಲಗಲ್ಲು, ಯಲ್ಲಪ್ಪ ಮುನಿಯಪ್ಪ ನೀಲಗಲ್, ರಮೇಶಪ್ಪ ಪರಸಪ್ಪ ಪಿಳಿಬಂಟರ್, ಸಿಂಧೂರಪ್ಪ ಪಡಿಯಪ್ಪ ಕಟ್ಟಿಮನಿ, ಸಿಂಧೂರಪ್ಪ ಹೊಳೆಯಪ್ಪ ಪಿಳಿಬಂಟರ್, ಯಲ್ಲಪ್ಪ ಹೊಳೆಯಪ್ಪ ಪಿಳಿಬಂಟರ್, ನಾಗಪ್ಪ ಹುಲ್ಲಪ್ಪ ವಡ್ಡರ್, ಮುತ್ತಪ್ಪ ಹನುಮಪ್ಪ ಹುಲ್ಲಣ್ಣನವರ್


ಕಾಮೆಂಟ್‌ಗಳಿಲ್ಲ: